ಕುವೆಂಪುರವರ ವಿಶ್ವ ಮಾನವ ಸಂದೇಶ ಪರಿಕಲ್ಪನೆ ಸಮಾಜ ಸುಧಾರಣೆಗೆ ದಾರಿ : ಎಂ.ಎ.ಗಫೂರ್

ಕುವೆಂಪುರವರ ವಿಶ್ವ ಮಾನವ ಸಂದೇಶ ಪರಿಕಲ್ಪನೆ ಸಮಾಜ ಸುಧಾರಣೆಗೆ ದಾರಿ : ಎಂ.ಎ.ಗಫೂರ್

0Shares

ಉಡುಪಿ ಡಿಸೆಂಬರ್ 29 : ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ರಾಷ್ಟ್ರಕವಿ ಕುವೆಂಪು ರವರು, ಡಾ.ಬಿ.ಆರ್ ಅಂಬೇಡ್ಕರ್, ಬಸವಣ್ಣ, ಬುದ್ದ ಸೇರಿದಂತೆ ಮತ್ತಿತರ ಮಹನೀಯರ ಆಚಾರ-ವಿಚಾರಧಾರೆಗಳನ್ನು ಹೊಸ ರೂಪದಲ್ಲಿ ನಾಡಿಗೆ ಪರಿಚಯಿಸಿ, ಎಲ್ಲಾ ಧರ್ಮಗಳು ಒಂದೇ, ಸಮಾಜದಲ್ಲಿ ಪ್ರತಿಯೊಬ್ಬರೂ ಸಾಮರಸ್ಯದಿಂದ ಜೀವನ ನಡೆಸಬೇಕು ಎಂಬ ಆಶಯದೊಂದಿಗೆ ಜಗತ್ತಿಗೆ ಸಾರಿದ ವಿಶ್ವ ಮಾನವ ಸಂದೇಶ ಪರಿಕಲ್ಪನೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಸಮಾಜ ಸುಧಾರಣೆ ಸಾಧ್ಯ ಎಂದು ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಹೇಳಿದರು. ಅವರು ಇಂದು ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು (ಬೋರ್ಡ್ ಹೈಸ್ಕೂಲ್) ಜನತಾ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ರವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುವೆಂಪು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ವಿವಿಧತೆಯಲ್ಲಿ ಏಕತೆ ಹೊಂದಿರುವ ನಮ್ಮ ದೇಶದಲ್ಲಿ ಮನುಜ-ಮನುಜರಲ್ಲಿ ಭಾತೃತ್ವ ಮೂಡಬೇಕು. ಜಾತಿ, ಮತ, ಧರ್ಮ, ಪಂಥಕ್ಕೆ ಆದ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂಬ ಆಶಾ ಭಾವನೆಯೊಂದಿಗೆ ಕುವೆಂಪು ನೀಡಿದ ವಿಶ್ವ ಮಾನವ ಸಂದೇಶ ಮನುಕುಲಕ್ಕೆ ಮಾದರಿಯಾಗುವಂತದ್ದು. ಅವರು ರಚಿಸಿದ ಸಾಹಿತ್ಯಗಳು ಎಲ್ಲಾ ವರ್ಗದ ವಯೋಮಾನದವರಿಗೂ ಅನ್ವಯವಾಗುವಂತೆ ಹಲವು ಆಯಾಮಗಳನ್ನು ಹೊಂದಿದೆ. ವಿದ್ಯಾರ್ಥಿಗಳು ಇವುಗಳನ್ನು ಓದಿ, ಅರ್ಥೈಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದರು.


ಮಹನೀಯರುಗಳನ್ನು ಗೌರವಿಸಿ, ಅವರ ತತ್ವ, ಸಿದ್ಧಾಂತ, ಆದರ್ಶಗಳನ್ನು ಮನನ ಮಾಡಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರಿಂದ ಪರಿಪೂರ್ಣ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ. ಈ ನಿಟ್ಟಿನಲ್ಲಿ ಸರಕಾರದ ವತಿಯಿಂದ ಧೀಮಂತ ನಾಯಕರುಗಳ, ಮಹನೀಯರುಗಳ ಜಯಂತಿ ಆಚರಣೆಗಳನ್ನು ಆಚರಿಸಲಾಗುತ್ತಿದೆ. ಕುವೆಂಪು ರವರ ಕಥೆ, ಕಾದಂಬರಿ, ಕಾವ್ಯ, ಮಹಾಕಾವ್ಯ, ವಿಮರ್ಶೆ, ಪ್ರಬಂಧ, ಜೀವನ ಚರಿತ್ರೆ, ನಾಟಕಗಳಲ್ಲಿ ಅಡಿಗಿದ ಬದುಕಿನ ಸಾರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ದಾರಿದೀಪವಾಗಲಿದ್ದು, ಯುವಪೀಳಿಗೆ ಕುವೆಂಪು ರವರ ಪುಸ್ತಕಗಳನ್ನು ಅಧ್ಯಯನ ಮಾಡುವುದರೊಂದಿಗೆ ಅವರ ಕಾವ್ಯಗಳಲ್ಲಿನ ಮಾನವೀಯ ಮೌಲ್ಯಗಳನ್ನು ಪಾಲಿಸುವಂತಾಗಲಿ ಎಂದು ಸಲಹೆ ನೀಡಿದರು.

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ವಿಷ್ಣುಮೂರ್ತಿ ಪ್ರಭು ಉಪನ್ಯಾಸ ನೀಡಿ ಮಾತನಾಡಿ, ರಸ-ಋಷಿ ಕವಿ ಕುವೆಂಪು ರವರ ಜನ್ಮ ದಿನಾಚರಣೆಯನ್ನು ವಿಶ್ವ ಮಾನವ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಬಾಲ್ಯದಿಂದಲೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದ್ದ ಇವರು ಹಲವು ನಾಟಕಗಳು, ಸಾಹಿತ್ಯಗಳನ್ನು ರಚಿಸಿದ್ದರು ಜೊತೆಗೆ ಪ್ರೌಢಶಾಲಾ ಹಂತದಲ್ಲಿರುವಾಗಲೇ ಆಂಗ್ಲಭಾಷೆಯ ಮಹಾಕಾವ್ಯಗಳನ್ನು ಓದಿದ್ದರು ಎಂದರು.

ಸತ್ವಯುತವಾದ ಸಾಹಿತ್ಯವನ್ನು ರಚಿಸುವುದರೊಂದಿಗೆ ಜಾತಿ, ಮತ, ಧರ್ಮದ ಗಡಿಗಳನ್ನು ಮೀರಿ ಎಲ್ಲರೂ ಮಾನವರೇ, ಮಾನವೀಯತೆಯೇ ದೊಡ್ಡ ಧರ್ಮ ಎಂಬ ಸಂದೇಶ ಸಾರಿರುವ ರಾಷ್ಟ್ರಕವಿ ಕುವೆಂಪು ರವರು ಸಾಹಿತ್ಯ ಲೋಕದಲ್ಲಿ ಪ್ರಥಮ ಬಾರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ಕರುನಾಡಿಗೆ ತಂದುಕೊಟ್ಟಿದ್ದಾರೆ. ಸಾಹಿತ್ಯಗಳನ್ನು ಅರಿತುಕೊಳ್ಳಲು ಮೊದಲು ಉತ್ತಮ ಓದುಗಾರರಾಗಬೇಕು. ಆಗ ಮಾತ್ರ ಸಾಹಿತ್ಯದ ಬಗ್ಗೆ ಒಲವು ಮೂಡುತ್ತದೆ. ಕುವೆಂಪು ರವರ ಕಾವ್ಯಗಳಲ್ಲಿನ ತತ್ವಗಳನ್ನು ಮಾದರಿಯಾಗಿಟ್ಟುಕೊಂಡು ವಿದಾರ್ಥಿಗಳೂ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶ್ವ ಮಾನವ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಇರಬೇಕು.

ಪ್ರತಿಯೊಬ್ಬರಲ್ಲೂ ಸಮಾನತೆ, ಒಳ್ಳೆಯದನ್ನು ಬಯಸುವ ಗುಣವಿದ್ದಾಗ ಮಾನವ ಕಲ್ಪನೆ ಮೂಡುತ್ತದೆ. ಕುವೆಂಪು ಅವರೊಂದಿಗೆ ಇತರೆ ಲೇಖಕರುಗಳ ಬರೆದ ಪುಸ್ತಕಗಳನ್ನು ಓದುವುದರಿಂದ ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದ ಅವರು, ವಿಶ್ವ ಮಾನವ ದಿನಾಚರಣೆಗೆ ಪೂರಕವಾಗಿ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ಕರೆ

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ, ಕಾಲೇಜಿನ ಪ್ರಾಂಶುಪಾಲೆ ಲೀಲಾಭಟ್, ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಇಲಾಖೆಯ ಸಿಬ್ಬಂದಿ ವರ್ಷಾ ನಿರೂಪಿಸಿ, ಪ್ರೌಢಶಾಲಾ ವಿಭಾಗದ ಹಿರಿಯ ಸಹ ಶಿಕ್ಷಕಿ ಭಾಗೀರಥಿ ವಂದಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now