ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ : ನ್ಯಾ.ಯೋಗೇಶ್ ಪಿ.ಆರ್

ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ : ನ್ಯಾ.ಯೋಗೇಶ್ ಪಿ.ಆರ್

0Shares

ಉಡುಪಿ, ಮಾರ್ಚ್ 24 : ಉಡುಪಿ ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲೆಯ ಪ್ರತಿಯೊಬ್ಬ ನಾಗರಿಕರೂ ಸಹಕರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಕ್ಷಯ ರೋಗ ದಿನಾಚರಣೆ ಹಾಗೂ ಕ್ಷಯ ಮುಕ್ತ ಗ್ರಾಮ ಪಂಚಾಯತ್-ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕೇಂದ್ರ ಸರ್ಕಾರ 2030 ರ ಒಳಗೆ ಕ್ಷಯ ಮುಕ್ತ ಭಾರತವನ್ನಾಗಿಸುವ ಆಂದೋಲನವನ್ನು ಹಮ್ಮಿಕೊಂಡಿದೆ. ಜಿಲ್ಲೆಯನ್ನೂ ಸಹ ಕ್ಷಯ ಮುಕ್ತವನ್ನಾಗಿಸಬೇಕು. ಕ್ಷಯರೋಗಿಗಳನ್ನು ಮುಂಚಿತವಾಗಿ ಪತ್ತೆ ಹಚ್ಚುವುದು, ಸಂಪೂರ್ಣ ಚಿಕಿತ್ಸೆಯನ್ನು ನೀಡುವುದು ಹಾಗೂ ರೋಗವು ಇತರರಿಗೆ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು.

ಕ್ಷಯ ರೋಗ ಸಾಂಕ್ರಾಮಿಕ ಅಂಟುರೋಗವಾಗಿದ್ದು, 1986 ರ ಮಾರ್ಚ್ 24 ರಂದು ಡಾ. ರಾಬರ್ಟ್ ಕೋಚ್ ರವರು ಟಿ.ಬಿ. ಗೆ ಸಂಬಂಧಿಸಿದ ಎಂ.ಟಿ.ಬಿ ಬ್ಯಾಕ್ಟೀರಿಯಾವನ್ನು ಅನ್ವೇಷಣೆ ಮಾಡಿ, ವಿಚಾರ ಮಂಡಣೆ ಮಾಡಿದ್ದರ ನೆನಪಿಗಾಗಿ ಹಾಗೂ ಕ್ಷಯರೋಗದ ಕುರಿತು ಜಾಗೃತಿ ಮೂಡಿಸಲು ಪ್ರತೀ ವರ್ಷ ಮಾರ್ಚ್ 24 ರಂದು ವಿಶ್ವ ಕ್ಷಯ ರೋಗ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದರು.

ದೇಶದಲ್ಲಿ ಸರಿ ಸುಮಾರು 960 ಜನ ಟಿ.ಬಿ ಕಾಯಿಲೆಯಿಂದ ಮರಣ ಹೊಂದುತ್ತಿದ್ದಾರೆ. ಕ್ಷಯ ರೋಗಕ್ಕೆ ತುತ್ತಾದ ವ್ಯಕ್ತಿಯು ವರ್ಷಕ್ಕೆ ಕನಿಷ್ಠ 10-15 ಜನಕ್ಕೆ ರೋಗವನ್ನು ಅಂಟಿಸುತ್ತಿದ್ದಾನೆ. ಕ್ಷಯ ರೋಗಕ್ಕೆ ಕಾರಣವಾಗುವ ಬ್ಯಾಕ್ಟೀರಿಯವು ವ್ಯಕ್ತಿಯ ದೇಹವನ್ನು ಪ್ರವೇಶಿಸಿ, ಆತನ ದೇಹದ ಮೇಲೆ ಹಲವಾರು ಬದಲಾವಣೆ ತರುತ್ತದೆ. ನಿರಂತರ ಕೆಮ್ಮು, ಜ್ವರ, ರಾತ್ರಿಯ ವೇಳೆ ಬೆವರು ಬರುವಂತಹ ಲಕ್ಷಣಗಳು ಕಂಡುಬಂದಲ್ಲಿ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದು ಉತ್ತಮ ಆರೋಗ್ಯವನ್ನು ಹೊಂದಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕ್ಷಯ ರೋಗವು ಸಾಂಕ್ರಾಮಿಕ ರೋಗವಾಗಿದ್ದು, ರೋಗವನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ನೂರು ದಿನಗಳ ಕ್ಷಯರೋಗ ಅಭಿಯಾನದಲ್ಲಿ ಕ್ಷಯರೋಗಿಗಳನ್ನು ಗುರುತಿಸಿ, ಅವರುಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದರೊಂದಿಗೆ ಅವರು ಸಂಪೂರ್ಣವಾಗಿ ಗುಣಮುಖರಾಗುವವರೆಗೂ ಮೌಲ್ಯಮಾಪನ ಮಾಡಲಾಗುವುದು ಎಂದರು.

ಜನರ ಆರೋಗ್ಯವನ್ನು ಕಾಪಾಡಲು ಪಂಚಾಯತ್ ಮಟ್ಟದಿಂದಲೇ ಅಧಿಕಾರಿಗಳು ಸಮಾರೋಪಾದಿಯಲ್ಲಿ ಕೆಲಸ ಮಾಡಬೇಕು. ಗ್ರಾಮಸಭೆಗಳಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು ಎಂದ ಅವರು, ಸಾಂಕ್ರಾಮಿಕ ರೋಗಗಳನ್ನು ಕೊನೆಗಾಣಿಸುವಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳೊಂದಿಗೆ ಆಶಾ ಕಾರ್ಯಕರ್ತೆಯರೂ ಸಹ ಸಹಕಾರ ನೀಡಬೇಕು ಎಂದರು.

ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಚಿದಾನಂದ ಸಂಜು ಪ್ರಾಸ್ತಾವಿಕವಾಗಿ ಮಾತನಾಡಿ, 2015 ಕ್ಕೆ ಹೋಲಿಸಿದ್ದಲ್ಲಿ ಜಿಲ್ಲೆಯಲ್ಲಿ 2022 ರಲ್ಲಿ ಶೇ.40-60 ರಷ್ಟು ಟಿ.ಬಿ ಪ್ರಕರಣಗಳನ್ನು ಕಡಿಮೆ ಮಾಡುವುದರೊಂದಿಗೆ, ರಾಷ್ಟ್ರಮಟ್ಟದಲ್ಲಿ ಬೆಳ್ಳಿಯ ಪದಕವನ್ನು ಉಡುಪಿ ಜಿಲ್ಲೆಯು ಪಡೆದುಕೊಂಡಿದೆ. ಕಳೆದ ಸಾಲಿನಲ್ಲಿ ಶೇ. 9 ರಷ್ಟು ಟಿ.ಬಿ ಪ್ರಕರಣಗಳನ್ನು ಸಹ ಕಡಿಮೆ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಕ್ಷಯ ರೋಗಿಗಳನ್ನು ಪತ್ತೆಹಚ್ಚಲು ನ್ಯಾಟ್ ಮೂಲಕ ಪರೀಕ್ಷೆಯನ್ನು ನಡೆಸಿ, ರೋಗಿಗಳನ್ನು ಚಿಕಿತ್ಸೆಯ ವ್ಯಾಪ್ತಿಗೆ ಕರೆತಂದು ಸೂಕ್ತ ಚಿಕಿತ್ಸೆ ನೀಡುತ್ತಿದ್ದೇವೆ. ಕ್ಷಯ ರೋಗದ ಸೋಂಕಿಗೆ ಒಳಗಾದವರಿಗೆ ಮೂರು ತಿಂಗಳವರೆಗೆ ಚಿಕಿತ್ಸೆ ನೀಡಿ, ಸೋಂಕಿತರ ಸಂಖ್ಯೆಯನ್ನು ಕಡಿಮೆ ಮಾಡುವಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ. ಅದಲ್ಲದೆ ಬಿ.ಸಿ.ಜಿ ಲಸಿಕೆಯನ್ನು ಸಹ ಕ್ಷಯ ರೋಗ ಕಾಯಿಲೆ ಬರುವಂತಹ ಸಾಧ್ಯತೆ ಇರುವ 60 ವರ್ಷ ಮೇಲ್ಪಟ್ಟವರಿಗೆ, ಡಯಾಬಿಟಿಸ್ ರೋಗಿಗಳಿಗೆ, ಧೂಮಪಾನ ಹಾಗೂ ಮದ್ಯಪಾನ ಮಾಡುವವರಿಗೆ, ಕ್ಷಯರೋಗದಿಂದ ಗುಣಮುಖರಾದವರಿಗೆ ಹಾಗೂ ಕ್ಷಯ ರೋಗಿಗಳ ಸಂಪರ್ಕದಲ್ಲಿರುವವರಿಗೆ ಈ ಲಸಿಕೆಯನ್ನು ನೀಡುವ ಮೂಲಕ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಸತತ ಪ್ರಯತ್ನ ನಡೆಸಲಾಗುತ್ತಿದೆ ಎಂದರು. 

ಇದೇ ಸಂದರ್ಭದಲ್ಲಿ ಗ್ರಾಮದ ಜನರ ಆರೋಗ್ಯ ತಪಾಸಣೆ, ಗುಣಮುಖವಾಗಿರುವ ಅಂಕಿ-ಅಂಶ, ಸೇರಿದಂತೆ ಮತ್ತಿತರ ಮಾನದಂಡಗಳನ್ನು ಅನುಸರಿಸುವುದರೊಂದಿಗೆ ಕಳೆದ ಸಾಲಿನಲ್ಲಿ ಜಿಲ್ಲೆಯ 26 ಗ್ರಾಮ ಪಂಚಾಯತ್ಗಳನ್ನು ಕ್ಷಯ ಮುಕ್ತ ಗ್ರಾಮ ಪಂಚಾಯತ್ಗಳೆಂದು ಆಯ್ಕೆ ಮಾಡಲಾಗಿದ್ದು, ಅವುಗಳ ಪೈಕಿ ಪ್ರಸಕ್ತ ಸಾಲಿನಲ್ಲಿ 23 ಗ್ರಾಮ ಪಂಚಾಯತ್ಗಳಿಗೆ ರಜತ ಪದಕ ಹಾಗೂ ಪ್ರಸಕ್ತ ಸಾಲಿನಲ್ಲಿ ಹೊಸದಾಗಿ ಕ್ಷಯ ಮುಕ್ತ ಗ್ರಾಮ ಪಂಚಾಯತ್ಗಳೆಂದು ಆಯ್ಕೆ ಮಾಡಲಾದ 39 ಗ್ರಾಮ ಪಂಚಾಯತ್ಗಳಿಗೆ ಕಂಚಿನ ಪದಕದೊಂದಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಪ್ರಸಕ್ತ ಸಾಲಿನ ಕ್ಷಯ ನಿರ್ಮೂಲನಾ ಕಾರ್ಯಕ್ರಮದಲ್ಲಿ ವಿಶೇಷ ಸೇವೆ ಸಲ್ಲಿಸಿದ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ್ ಉಡುಪ, ಜಿಲ್ಲೆಯ ಎಲ್ಲಾ ತಾಲೂಕಿನ ಗ್ರಾಮ ಪಂಚಾಯತ್ಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು, ಸದಸ್ಯರುಗಳು, ಪಿ.ಡಿ.ಓ.ಗಳು, ತಾಲೂಕು ವೈದ್ಯಾಧಿಕಾರಿಗಳು, ಇಲಾಖೆಯ ವೈದ್ಯಾಧಿಕಾರಿಗಳು, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆಲಂದೂರು ಮಂಜುನಾಥ ಎಸ್ ಗಾಣಿಗ ಸ್ವಾಗತಿಸಿ, ನಿರೂಪಿಸಿದರೆ, ಸಂದೀಪ್ ವಂದಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now