
ಉಡುಪಿ : ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಸಾಮಾನ್ಯ ಸಭೆಯು ದಿನಾಂಕ 07-09-2025ರ ರವಿವಾರದಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಸೊಸೈಟಿಯ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರ ಅಧ್ಯಕ್ಷತೆಯಲ್ಲಿ ಜರಗಿತು.
ಸಂಘದ ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್ರವರು ವಾರ್ಷಿಕ ವರದಿ, ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 21,519 ಸದಸ್ಯರಿಂದ ರೂ. 4.83 ಕೋಟಿ ಪಾಲು ಬಂಡವಾಳ ಹಾಗೂ ರೂ. 573.19 ಕೋಟಿ ಠೇವಣಿ ಹೊಂದಿದ್ದು, ರೂ. 476.99 ಕೋಟಿ ಹೊರಬಾಕಿ ಸಾಲ ಹೊಂದಿರುತ್ತದೆ. ಸಂಘವು 2024-25ನೇ ಸಾಲಿನಲ್ಲಿ ಸರಿಸುಮಾರು ರೂ. 2,956 ಕೋಟಿಗೂ ಮೇಲ್ಪಟ್ಟು ವಾರ್ಷಿಕ ವಹಿವಾಟು ನಡೆಸಿರುತ್ತದೆ. ವರದಿ ಸಾಲಿನಲ್ಲಿ ಸಂಘವು ರೂ.15.47 ಕೋಟಿ ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಯಿತು.
ಸಮಾಜಮುಖಿ ಕಾರ್ಯಕ್ರಮದ ಅಂಗವಾಗಿ ಸಂಘದ ಪ್ರಧಾನ ಶಾಖೆಯ ಸುತ್ತಮುತ್ತಲಿನ ಆಯ್ದ 13 ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸಮ್ಮಾನಿಸಿ ಗೌರವಿಸಲಾಯಿತು.
ಸತತ 216 ಗಂಟೆಗಳ ಕಾಲ ನಿರಂತರ ಭರತನಾಟ್ಯದ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ದಾಖಲೆ ಬರೆದ ಬ್ರಹ್ಮಾವರದ ಆರೂರಿನ ವಿದುಷಿ ದೀಕ್ಷಾ ವಿ. ರವರನ್ನು ಸಂಘದ ವತಿಯಿಂದ ಸಮ್ಮಾನಿಸಿ ಗೌರವಿಸಲಾಯಿತು.

ಸತತವಾಗಿ 2 ಬಾರಿ ರಾಷ್ಟ್ರ ಪ್ರಶಸ್ತಿ, 9 ಬಾರಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆದಿರುವ ಸಂಸ್ಥೆಗೆ ಇತ್ತೀಚೆಗೆ ಮಂಗಳೂರಿನಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ 2024-25ನೇ ಸಾಲಿನಲ್ಲಿ ಸಂಘವು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ “ಸಾಧನಾ ಪ್ರಶಸ್ತಿ” ಲಭಿಸಿರುತ್ತದೆ. ಸತತವಾಗಿ 19ನೇ ಬಾರಿಗೆ ಒಲಿದ ಜಿಲ್ಲಾ ಪ್ರಶಸ್ತಿ ಇದಾಗಿರುತ್ತದೆ ಎಂದು ತಿಳಿಸಿದರು.
ಡಿಜಿಟಲೀಕರಣದ ಹೆಜ್ಜೆಯಾಗಿ ಅಭಿವೃದ್ಧಿಪಡಿಸಿದ “ಚೇತನಾ ಮೊಬೈಲ್ ಆ್ಯಪ್” ಕುರಿತು ಮಾಹಿತಿ ನೀಡಿ, ಸುರಕ್ಷಿತ ಮೊಬೈಲ್ ಬ್ಯಾಂಕಿಂಗ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಭದ್ರತಾಕ್ರಮ ಅನುಸರಿಸಿಕೊಂಡು ಮೊಬೈಲ್ ಆ್ಯಪ್ನ್ನು ಅಭಿವೃದ್ಧಿಪಡಿಸಿದ್ದು ಸದಸ್ಯರು ಈ ಸೌಲಭ್ಯದ ಪ್ರಯೋಜನ ಪಡೆಯುವಂತೆ ತಿಳಿಸಿದರು. ಆಧುನಿಕತೆಗೆ ಸಾಕ್ಷಿಯಾಗಿ ದೈನಿಕ ಠೇವಣಿ ಸಂಗ್ರಹಣೆಯನ್ನು ಮೊಬೈಲ್ ಆ್ಯಪ್ (ಪಿಗ್ಮಿ ಮೊಬೈಲ್ ಆ್ಯಪ್) ಮೂಲಕ ನಡೆಸಲಾಗುತ್ತಿದೆ ಎಂದರು. ಕೇವಲ ಬ್ಯಾಂಕಿಂಗ್ ವ್ಯವಹಾರವನ್ನು ಮಾತ್ರ ನೆಚ್ಚಿಕೊಳ್ಳದೇ ಸಮಾಜಮುಖಿ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದು ವಾರ್ಷಿಕ ಸುಮಾರು ರೂ. 25 ಲಕ್ಷದಷ್ಟು ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ತೊಡಗಿಸುತ್ತಿದೆ ಎಂದರು.
ಬ್ಯಾಂಕಿಂಗೇತರ ವ್ಯವಹಾರಗಳಾದ ಸೇಫ್ ಲಾಕರ್, ಇ-ಸ್ಟಾಂಪಿಂಗ್, ಪಾನ್ ಕಾರ್ಡ್, RTGS/NEFT, ವೆಸ್ಟರ್ನ್ ಯೂನಿಯನ್ ಮನಿ ಟ್ರಾನ್ಸ್ಫರ್, ಲಂಬಾರ್ಡ್ ಆರೋಗ್ಯ ಕಾರ್ಡ್, ಮಣಿಪಾಲ ಆರೋಗ್ಯ ಕಾರ್ಡ್, ಎಲ್ಲಾ ರೀತಿಯ ವಿಮಾ ಸೌಲಭ್ಯ, ಮಿಸ್ಡ್ ಕಾಲ್ ಸರ್ವಿಸ್, ಮೊಬೈಲ್ ಆ್ಯಪ್ ಮೂಲಕ ಪಿಗ್ಮಿ ಸಂಗ್ರಹಣೆ, ಉಚಿತ ಎಸ್.ಎಂ.ಎಸ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now