
ಉಡುಪಿ, ಅಕ್ಟೋಬರ್ 14 : ಜಿಲ್ಲಾ ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆ ಹಾಗೂ ವೈಭವಯುತವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
೭೦ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ ೧ ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ ೯ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ಸಂದೇಶ ನೀಡಲಿದ್ದಾರೆ. ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ನಂತರದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದ ಅವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಗೈದ ಆಯ್ಕೆಯಾದ ಗಣ್ಯರಿಗೆ ಸನ್ಮಾನ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ ೮ ಗಂಟೆಗೆ ನಗರದ ಬೋರ್ಡ್ ಹೈಸ್ಕೂಲ್ನಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.
ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರು, ಮುಖಂಡರು ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರಿಗೆ ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಆಹ್ವಾನಿಸಬೇಕು. ಕಾರ್ಯಕ್ರಮದಲ್ಲಿ ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ-ಸಂಸ್ಥೆಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಕಾರ್ಯಕ್ರಮನ್ನು ಯಶಸ್ಸಿಯಾಗಿ ನಡೆಸಲು ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ನೀಡಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದ ಅವರು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವುದರೊಂದಿಗೆ ಭಾಗವಹಿಸುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಹಾಗೂ ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now