
ಬ್ರಹ್ಮಾವರ ಬೆಳ್ಮಾರು:ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬೆಳ್ಮಾರು ಇಲ್ಲಿ 77ನೇ ಗಣರಾಜ್ಯೋತ್ಸವವನ್ನು ಅತಿ ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್ಡಿಎಮ್ಸಿ) ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ತುಳುನಾಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಶ್ರೀ ಫ್ರಾಂಕಿ ಡಿಸೋಜ ಕೊಳಲಗಿರಿ ಮಾತನಾಡಿದ ಅವರು, ಭಾರತದ ಸಂವಿಧಾನದ ಮಹತ್ವ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಇಂದಿನ ಪೀಳಿಗೆ ದೇಶದ ಏಕತೆ, ಶಿಸ್ತು ಮತ್ತು ರಾಷ್ಟ್ರಭಕ್ತಿಯನ್ನು ಬೆಳೆಸಿಕೊಳ್ಳಬೇಕಾದ ಅಗತ್ಯತೆಯ ಕುರಿತು ಮನೋಜ್ಞವಾಗಿ ವಿವರಿಸಿದರು. ಮಕ್ಕಳಲ್ಲಿ ದೇಶಪ್ರೇಮ ಮತ್ತು ಸಂವಿಧಾನಾತ್ಮಕ ಮೌಲ್ಯಗಳ ಅರಿವು ಮೂಡಿಸುವಲ್ಲಿ ಶಾಲೆಗಳ ಪಾತ್ರ ಅತ್ಯಂತ ಮಹತ್ವದ್ದೆಂದು ಅವರು ತಿಳಿಸಿದರು. ಹಾಗೂ ತುಳುನಾಡಿನ ಸಂಸ್ಕ್ರತಿ ಮತ್ತು ಗುರು ಹಿರಯರ ಮೇಲಿನ ಗೌರವ ಕುರಿತು ಮೈಗೂಡಿಸುವಂತೆ ಕರೆನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಎಮ್ಸಿ ಅಧ್ಯಕ್ಷೆ ಶ್ರೀಮತಿ ರೋಹಿಣಿ ರಾವ್ ಅವರು ಪಾಲ್ಗೊಂಡು ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ಸಲ್ಲಿಸಿದರು. ಅವರು ಮಾತನಾಡುತ್ತ ಶಾಲೆಯ ಶೈಕ್ಷಣಿಕ ಅಭಿವೃದ್ಧಿಗೆ ಎಸ್ಡಿಎಮ್ಸಿ ಸದಾ ಸಹಕಾರ ನೀಡುತ್ತಿದೆ ಎಂದು ತಿಳಿಸಿ, ಶಿಕ್ಷಕರ ಪರಿಶ್ರಮ ಹಾಗೂ ಪೋಷಕರ ಸಹಭಾಗಿತ್ವವೇ ಮಕ್ಕಳ ಭವಿಷ್ಯ ರೂಪಿಸುವ ಮೂಲಶಕ್ತಿಯಾಗಿದೆ ಎಂದರು.
ಎಸ್ಡಿಎಮ್ಸಿ ಉಪಾಧ್ಯಕ್ಷೆ ಶ್ರೀಮತಿ ವನಿತ ಅವರು ಮಕ್ಕಳ ಸಮಗ್ರ ಅಭಿವೃದ್ಧಿಗೆ ಪಾಠಶಾಲೆಯ ಜೊತೆಗೆ ಪೋಷಕರ ಜವಾಬ್ದಾರಿಯೂ ಮಹತ್ವದ್ದೆಂದು ಹೇಳಿದರು. ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ ಮತ್ತು ಮೌಲ್ಯಾಧಾರಿತ ಶಿಕ್ಷಣವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಜತ್ ಭಟ್ ಅವರು ಮಾತನಾಡಿ, ಹಳೆ ವಿದ್ಯಾರ್ಥಿ ಸಂಘವು ಶಾಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಕೈಜೋಡಿಸಲಿದೆ ಎಂದು ಭರವಸೆ ನೀಡಿದರು. ಶಾಲೆಯೊಂದಿಗೆ ತಮ್ಮ ಭಾವನಾತ್ಮಕ ನಂಟನ್ನು ಹಂಚಿಕೊಂಡು, ಇಂದಿನ ವಿದ್ಯಾರ್ಥಿಗಳು ಉತ್ತಮ ನಾಗರಿಕರಾಗಲು ಶ್ರಮಿಸಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಸ್ಡಿಎಮ್ಸಿ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಹಾಗೂ ಶ್ರೀ ರಾಘವೇಂದ್ರ ರಾವ್ ಅವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ತಿಳಿಸಿದರು.
ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು, ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿ ಎಲ್ಲರ ಮನಗೆದ್ದರು. ಕಾರ್ಯಕ್ರಮದ ಕೊನೆಯಲ್ಲಿ ರಾಷ್ಟ್ರಗೀತೆಯೊಂದಿಗೆ ಸಮಾರಂಭ ಸಮಾಪ್ತಿಗೊಂಡಿತು

Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now