
ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರದ ಪ್ರೌಢಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ನಿರಂಜನ್ ಹೆಗಡೆ, ವಕೀಲರು , ಕುಂದಾಪುರ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ನಾಯಕತ್ವ, ಜವಾಬ್ದಾರಿ ಮತ್ತು ಸೇವಾ ಮನೋಭಾವವನ್ನು ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿ ಸರ್ಕಾರವು ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ನಾಯಕತ್ವದ ಗುಣಗಳನ್ನು ಬೆಳೆಸುವ ವೇದಿಕೆಯಾಗಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಶಾಜಿ ಅಬ್ರಹಾಂ, ವಕೀಲರು , ಕುಂದಾಪುರ ಅವರು ನೂತನ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಅಧ್ಯಕ್ಷರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿ, ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆ, ಶಿಸ್ತು ಹಾಗೂ ಸೇವಾ ಮನೋಭಾವದಿಂದ ನಿರ್ವಹಿಸುವಂತೆ ಕರೆ ನೀಡಿದರು. ಬಳಿಕ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಾಯಕತ್ವ, ಪ್ರಾಮಾಣಿಕತೆ, ಆತ್ಮವಿಶ್ವಾಸ ಮತ್ತು ಸಾಮಾಜಿಕ ಹೊಣೆಗಾರಿಕೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಚಂದ್ರಶೇಖರ್ ಶೆಟ್ಟಿ, ಉಪ ಪ್ರಾಂಶುಪಾಲರು, ಕರ್ನಾಟಕ ಪಬ್ಲಿಕ್ ಸ್ಕೂಲ್, ಕೋಟೇಶ್ವರ ವಹಿಸಿ, ವಿದ್ಯಾರ್ಥಿ ಸರ್ಕಾರವು ಶಾಲೆಯಲ್ಲಿ ಶಿಸ್ತು, ಸಂಘಟನೆ ಹಾಗೂ ನಾಯಕತ್ವವನ್ನು ಬೆಳೆಸುವ ಮಹತ್ವದ ವೇದಿಕೆಯಾಗಿದೆ ಎಂದು ಹೇಳಿದರು.
ಶ್ರೀಮತಿ ಜಯಶ್ರೀ ಭಟ್, ಹಿರಿಯ ಶಿಕ್ಷಕರು ಗೌರವ ಉಪಸ್ಥಿತರಾಗಿ ಕಾರ್ಯಕ್ರಮಕ್ಕೆ ಮೆರುಗು ತಂದರು.
ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿ ವಹಿಸಿದ್ದ ಶಿಕ್ಷಕಿ ನಾಗರತ್ನ ಎಂ ಅತಿಥಿಗಳನ್ನು ಪರಿಚಯಿಸಿದರು
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿ ಮುಖಂಡ ರುದ್ರ ಹಾಗೂ ಶಾಲಾ ವಿದ್ಯಾರ್ಥಿನಿ ಮುಖಂಡೆ ಖುಷಿ ದೇವಾಡಿಗ ಅವರ ನೇತೃತ್ವದಲ್ಲಿ ನೂತನ ವಿದ್ಯಾರ್ಥಿ ಸರ್ಕಾರ ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.
ಕಾರ್ಯಕ್ರಮವನ್ನು ಸಹ ಶಿಕ್ಷಕಿ ಶ್ರೀಮತಿ ಅನುರಾಧ ಅವರು ಅಚ್ಚುಕಟ್ಟಾಗಿ ನಿರೂಪಿಸಿದರು. ಶ್ರೀ ರಮಾನಂದ್, ಶಿಕ್ಷಕರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶ್ರೀ ಉದಯ ಮಡಿವಾಳ ಎಂ., ದೈಹಿಕ ಶಿಕ್ಷಣ ಶಿಕ್ಷಕರು ವಂದನಾರ್ಪಣೆ ಸಲ್ಲಿಸಿದರು.
ಶಿಕ್ಷಕ ವೃಂದ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ, ಸೇವಾ ಮನೋಭಾವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now