ವಾಣಿಜ್ಯ ಕ್ಷೇತ್ರದಲ್ಲಿ ಹೇರಳ ಅವಕಾಶ ಲಭ್ಯ: ಸಿಎ ವಿನೋದ್‌ ಚಂದ್ರನ್‌

ವಾಣಿಜ್ಯ ಕ್ಷೇತ್ರದಲ್ಲಿ ಹೇರಳ ಅವಕಾಶ ಲಭ್ಯ: ಸಿಎ ವಿನೋದ್‌ ಚಂದ್ರನ್‌

0Shares

ಮಂಗಳೂರು, ಮೇ 13: ದೇಶದಲ್ಲಿ ವಾಣಿಜ್ಯ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳು ಲಭ್ಯವಿದ್ದು, ಹಣಕಾಸು ಅದರ ಬೆನ್ನುಲುಬಾಗಿದೆ. ಈ ಕ್ಷೇತ್ರದಲ್ಲಿ ನೈತಿಕತೆ, ಸಂಯಮ ಅತಿಮುಖ್ಯ ಎಂದು ಮಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ವಿನೋದ್ ಚಂದ್ರನ್ ಅಭಿಪ್ರಾಯ ಪಟ್ಟರು.

ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ವಾಣಿಜ್ಯ ಸಂಘದ ವತಿಯಿಂದ ಹಣಕಾಸಿನ ಉದಯೋನ್ಮುಖ ಧೋರಣೆಗಳು ವಿಷಯದ ಕುರಿತು ಏರ್ಪಡಿಸಲಾಗಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

1991-92ರಲ್ಲಿ ಜಾಗತೀಕರಣವು ದೇಶದ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವಹಿಸಿತು. ಅಲ್ಲದೇ, ಜಾಗತಿಕ ಮಟ್ಟದಲ್ಲಿ ವ್ಯಾಪಾರ, ವಹಿವಾಟನ್ನು ಸುಲಭಗೊಳಿಸಿದ್ದಲ್ಲೇ ಮಹತ್ತರವಾದ ಬದಲಾವಣೆಗಳಿಗೆ ಕಾರಣವಾಯಿತು. ಇಂದು ದೇಶದಲ್ಲಿ 44 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ವಾಣಿಜ್ಯ ಪದವಿ ಪಡೆದುಕೊಳ್ಳುತ್ತಿದ್ದಾರೆ. ಹಾಗಾಗಿ ಇಲ್ಲಿ ಅವಕಾಶಗಳ ಜೊತೆಗೆ ಸವಾಲುಗಳು ಸಾಕಷ್ಟಿವೆ ಎಂದು ತಮ್ಮ ಅನುಭವದ ಮಾತುಗಳನ್ನು ಹಂಚಿಕೊಂಡರು.

ಇಂದು ಶ್ರದ್ಧೆಯಿಂದ ವ್ಯಾಪಾರ ವಹಿವಾಟು ಆರಂಭಿಸಿದರೆ ಭವಿಷ್ಯದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಚಾರ್ಟರ್ಡ್ ಅಕೌಂಟೆಂಟ್ ಎಂಬುದು ದೇಶದಲ್ಲಿ ಉನ್ನತ ವೃತ್ತಿಯೆಂದು ಪರಿಗಣಿಸಲಾಗುತ್ತದೆ. ಆದರೆ ಅದಕ್ಕೆ ಸಾಕಷ್ಟು ಪರಿಶ್ರಮದ ಮತ್ತು ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕಿದೆ. ಹಣಕಾಸು ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳು ದೇಶದಲ್ಲಿ ಮುಂದಿನ ದಿನಗಳಲ್ಲಿ ಹೊಸ ಕ್ರಾಂತಿಯನ್ನುಂಟು ಮಾಡಲಿದೆ. ಕೇವಲ ನೌಕರಿ.ಕಾಂನಂತಹ ಉದ್ಯೋಗ ಮಾಹಿತಿ ಕೇಂದ್ರವು 30,000ಕ್ಕೂ ಹೆಚ್ಚು ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡುತ್ತದೆ. ಆ ನಿಟ್ಟಿನಲ್ಲಿ ಪದವಿ ಹಂತದಲ್ಲೇ ವಿದ್ಯಾರ್ಥಿಗಳು ಕೌಶಲ್ಯಭರಿತರಾಗಬೇಕಿದೆ ಎಂದು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ಸುಧಾ ಎನ್. ವೈದ್ಯ, ಕಾರ್ಯಕ್ರಮ ಸಂಯೋಜಕ ಪ್ರೊ. ಯತೀಶ್ ಕುಮಾರ್ ಸೇರಿದಂತೆ ವಿವಿಧ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕ ಕಾರ್ತಿಕ್‌ ಪೈ ವಂದನಾರ್ಪಣೆ ನಡೆಸಿಕೊಟ್ಟರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now