
ಉಡುಪಿ, : ಹಿರಿಯಡಕದ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ. ನಾಗಣ್ಣ ಗೌಡ ಹೇಳಿದರು

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ಅನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸುವ ಯೋಜನೆಯ ಕುರಿತು ಆಯೋಜಿಸಲಾದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಉಡುಪಿಯ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ವಿಧ್ಯಾಭ್ಯಾಸ ಮಾಡುತ್ತಿದ್ದು, ಸಕ್ರಿಯವಾಗಿ ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನು ರಾಜ್ಯದಲ್ಲಿಯೇ ಮಾದರಿ ಶಾಲೆಯನ್ನಾಗಿ ಪರಿವರ್ತಿಸಲು ಚಿಂತನೆ ನಡೆಸಿದ್ದು, ಇದಕ್ಕೆ ಪೂರಕವಾಗಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳು ಶಾಲೆಯಲ್ಲಿ ಓದಲು, ಬರೆಯಲು ಹಾಗೂ ಲೆಕ್ಕಾಚಾರ ಮಾಡುವುದನ್ನು ಅವಶ್ಯವಾಗಿ ಕಲಿಸಿದಾಗ ಮಾತ್ರ ಅದು ಭವಿಷ್ಯದಲ್ಲಿ ಅವರಿಗೆ ಅನುಕೂಲವಾಗುತ್ತದೆ ಎಂದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಗಳು ಶಾಲೆಗೆ ಸೇರುವಂತೆ ನೋಡಿಕೊಳ್ಳುವುದು ಪೋಷಕರ ಹಾಗೂ ಅಧಿಕಾರಿಗಳ ಕೆಲಸ. ಮಕ್ಕಳು ಬಾಲಕಾರ್ಮಿಕ ವೃತ್ತಿಯಲ್ಲಿ ತೊಡಗಿಕೊಳ್ಳದಂತೆ ಎಚ್ಚರ ವಹಿಸಬೇಕು. ಆಗಿಂದಾಗ್ಗೆ ಅನಿರೀಕ್ಷಿತ ಭೇಟಿಗಳನ್ನು ಅವರು ಕೆಲಸ ಮಾಡುವ ಸ್ಥಳಗಳಿಗೆ ಭೇಟಿ ನೀಡಬೇಕು ಎಂದು ತಿಳಿಸಿದರು.
ಶಾಲಾ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳಲು ವಿದ್ಯಾರ್ಥಿಗಳಲ್ಲಿ ಅಂಥಹ ಮನೋಭಾವವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ವಿಧ್ಯಾಭ್ಯಾಸ ದೊಂದಿಗೆ ಆಟೋಟಗಳಲ್ಲಿ ಭಾಗವಹಿಸುವುದು ಅವಶ್ಯಕ. ಇದರಿಂದ ಅವರು ಸದೃಢವಾಗಿರಲು ಸಾಧ್ಯವಾಗುತ್ತದೆ ಎಂದ ಅವರು, ನರೇಗಾ ಯೋಜನೆಯಡಿ ಮಕ್ಕಳ ಆಟದ ಮೈದಾನ, ಕೈತೋಟಗಳ ಅಭಿವೃದ್ಧಿ ಸೇರಿದಂತೆ ಮತ್ತಿತರ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.
ಮಕ್ಕಳ ರಕ್ಷಣಾ ನೀತಿಯಲ್ಲಿ ಮಕ್ಕಳಿಗೆ ಒದಗಿಸಬೇಕಾದ ಮೂಲ ಸೌಕರ್ಯಗಳು, ಭದ್ರತೆ, ಮಕ್ಕಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಇವುಗಳನ್ನು ಶಾಲೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದರೊಂದಿಗೆ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಕರೆ ತರುವ ಕಾರ್ಯವನ್ನು ಮಾಡಬೇಕು ಎಂದರು.
ಮಕ್ಕಳ ರಕ್ಷಣಾ ಸಮಿತಿ ಸಭೆಗಳನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆಗಿಂದಾಗ್ಗೆ ಕೈಗೊಳ್ಳಬೇಕು. ಗ್ರಾಮಸಭೆಗಳಲ್ಲಿ ಸಹ ಮಕ್ಕಳು ಭಾಗವಹಿಸಬೇಕು. ಅಲ್ಲಿ ತಮಗೆ ಅವಶ್ಯವಿರುವ ಬೇಡಿಕೆಗಳನ್ನು ತಿಳಿಸುವುದಕ್ಕೆ ಅವಕಾಶ ಕಲ್ಪಿಸಬೇಕು. ಇಲ್ಲಿ ಬರುವ ಬೇಡಿಕೆಗಳನ್ನು ಪೂರೈಸುವ ಕೆಲಸವನ್ನು ಸಹ ಮಾಡಬೇಕು ಎಂದರು.
ಶಾಸಕ ಗುರ್ಮ್ ಸುರೇಶ್ ಶೆಟ್ಟಿ ಮಾತನಾಡಿ, ಸಮಾಜದಲ್ಲಿ ಪ್ರತಿಯೊಬ್ಬರೂ ಶಿಕ್ಷಣ ವಂತರಾಗಬೇಕು. ಪ್ರತಿಯೊಬ್ಬ ಮಕ್ಕಳಿಗೂ ಶಿಕ್ಷಣ ಒದಗಿಸುವುದು ಜನಪ್ರತಿನಿಧಿಗಳದ ನಮ್ಮಗಳ ಆದ್ಯ ಕಾರ್ಯ. ಜಿಲ್ಲೆಯಲ್ಲಿ ಇನ್ನು ಹೆಚ್ಚು ಶಾಲೆಗಳನ್ನು ಪಬ್ಲಿಕ್ ಶಾಲೆಗಳನ್ನಾಗಿಸಿ ಸರ್ಕಾರದ ಹಂತದಲ್ಲಿ ಆಗಬೇಕಾಗಿರುವ ಕೆಲಸ ಕಾರ್ಯಗಳನ್ನು ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪಂಚಾಯತ್ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್, ಡಿಡಿಪಿಐ ಗಣಪತಿ, ಡಿಡಿಪಿಯೂ ಮಾರುತಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























